Bible Versions
Bible Books

Hebrews 2 (ERVKN) Easy to Read Version - Kannadam

1 ಆದುದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.
2 ದೇವರು ತನ್ನ ದೂತರ ಮೂಲಕ ಕೊಟ್ಟ ವಾಕ್ಯವು ನಿಜವಾದದ್ದೆಂದು ತೋರಿಸಲ್ಪಟ್ಟಿದೆ. ಯೆಹೂದ್ಯರು ವಾಕ್ಯಕ್ಕೆ ವಿರುದ್ಧವಾಗಿ ತಪ್ಪು ಮಾಡಿದಾಗಲೆಲ್ಲಾ ಮತ್ತು ಅವಿಧೇಯರಾದಾಗಲೆಲ್ಲಾ ತಕ್ಕ ದಂಡನೆ ಹೊಂದುತ್ತಿದ್ದರು.
3 ನಮಗೆ ದಯಪಾಲಿಸಲ್ಪಟ್ಟ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.
4 ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.
5 ಮುಂದೆ ಬರುವ ನೂತನ ಲೋಕವನ್ನು ಆಳಲು ದೇವರು ದೇವದೂತರನ್ನು ಆರಿಸಲಿಲ್ಲ. ಈಗ ನಾವು ನಿಮಗೆ ಹೇಳುತ್ತಿರುವುದು ಲೋಕದ ಕುರಿತಾಗಿಯೇ.
6 ಅದನ್ನು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ: “ದೇವರೇ, ನೀನು ಮಾನವರನ್ನು ಏಕೆ ನೆನಪು ಮಾಡಿಕೊಳ್ಳಬೇಕು? ನೀನು ಮನುಷ್ಯನಿಗೋಸ್ಕರ ಏಕೆ ಚಿಂತಿಸಬೇಕು? ಅವನು ಅಷ್ಟೊಂದು ಮುಖ್ಯನಾದವನೇ?
7 ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ. ನೀನು ಅವನಿಗೆ ವೈಭವವನ್ನೂ ಗೌರವವನ್ನೂ ಕಿರೀಟವಾಗಿ ಇಟ್ಟಿರುವೆ.
8 ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ. ಕೀರ್ತನೆ 8:4-6 ದೇವರು ಎಲ್ಲವನ್ನೂ ಆತನಿಗೆ ಅಧೀನಗೊಳಿಸಿದ್ದರೆ, ಆತನು ಆಳದೆ ಇರುವಂಥದ್ದು ಒಂದಾದರೂ ಇಲ್ಲ. ಆದರೆ ಸಮಸ್ತದ ಮೇಲೆ ಅವನು ಆಳ್ವಿಕೆ ಮಾಡುತ್ತಿರುವುದು ನಮಗಿನ್ನೂ ಕಾಣುತ್ತಿಲ್ಲ.
9 ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣ ಹೊಂದಿದನು.
10 ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
11 ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.
12 ಯೇಸು ಹೇಳುತ್ತಾನೆ: “ದೇವರೇ, ನಿನ್ನನ್ನು ಕುರಿತು ನನ್ನ ಸಹೋದರ ಸಹೋದರಿಯರಿಗೆ ತಿಳಿಸುತ್ತೇನೆ; ನಿನ್ನ ಜನರೆಲ್ಲರ ಮುಂದೆ ನಿನ್ನ ಸ್ತೋತ್ರಗೀತೆಗಳನ್ನು ಹಾಡುತ್ತೇನೆ.” ಕೀರ್ತನೆ 22:22
13 ಆತನು ಮತ್ತೆ ಹೇಳುತ್ತಾನೆ: “ನಾನು ದೇವರಲ್ಲಿ ಭರವಸೆ ಇಡುತ್ತೇನೆ.” ಯೆಶಾಯ 8:17 ಆತನು ಹೇಳುತ್ತಾನೆ: “ನಾನಿಲ್ಲಿದ್ದೇನೆ. ದೇವರು ನನಗೆ ದಯಪಾಲಿಸಿರುವ ಮಕ್ಕಳು ನನ್ನೊಂದಿಗಿದ್ದಾರೆ.” ಯೆಶಾಯ 8:18
14 ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದುದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ,
15 ಅವರನ್ನು ಬಿಡುಗಡೆಗೊಳಿಸಬೇಕೆಂದು, ಅವರಂತೆಯೇ ಆಗಿ, ಮರಣ ಹೊಂದಿದನು. ಅವರು ಮರಣಭಯದಿಂದ, ಜೀವಮಾನವೆಲ್ಲ ಗುಲಾಮರಂತೆ ಜೀವಿಸುತ್ತಿದ್ದರು.
16 ಆತನು ಸಹಾಯ ಮಾಡುವುದು ಅಬ್ರಹಾಮನ ಸಂತತಿಯವರಿಗೇ ಹೊರತು ದೇವದೂತರಿಗಲ್ಲ.
17 ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.
18 ತಾನೇ ಶೋಧಿಸಲ್ಪಟ್ಟು ಸಂಕಟಕ್ಕೆ ಒಳಗಾದುದರಿಂದ, ಶೋಧಿಸಲ್ಪಡುವ ಜನರಿಗೆ ಸಹಾಯ ಮಾಡಲು ಈಗ ಆತನು ಸಮರ್ಥನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×